ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಯುವಕ-ಯುವತಿಯರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಹತ್ವದ ಸಿಹಿಸುದ್ದಿ ನೀಡಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗಷ್ಟೇ ಒಳಮೀಸಲಾತಿ ವಿವಾದ ಬಗೆಹರಿದಿರುವ ಹಿನ್ನೆಲೆಯಲ್ಲಿ, ಮುಂದಿನ ಒಂದು ವಾರದೊಳಗೆ ಬರೋಬ್ಬರಿ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆಯ ಬಲವರ್ಧನೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. “ಈಗಾಗಲೇ 545 ಪಿಎಸ್ಐಗಳು (PSI) ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಜೊತೆಗೆ ಹೊಸದಾಗಿ 600 ಪಿಎಸ್ಐಗಳ ನೇಮಕಾತಿ ಪ್ರಕ್ರಿಯೆಯನ್ನು ಸಹ ಮಾಡಿಕೊಳ್ಳಲಾಗುತ್ತಿದೆ.
ಇದೀಗ ಖಾಲಿ ಇರುವ ಹುದ್ದೆಗಳ ಪೈಕಿ 8,000 ಕಾನ್ಸ್ಟೆಬಲ್ಗಳ ನೇಮಕಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು” ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರವು ಈಗಾಗಲೇ ಘೋಷಿಸಿರುವ 56,834 ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಈ ಕಾನ್ಸ್ಟೆಬಲ್ ನೇಮಕಾತಿಯೂ ಸೇರಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಹೊಸದಾಗಿ 12 ಪೊಲೀಸ್ ಠಾಣೆಗಳು ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ಅಪರಾಧಗಳ ನಿಯಂತ್ರಣದ ದೃಷ್ಟಿಯಿಂದ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯವಿರುವ ಕಡೆಗಳಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಪ್ರಸ್ತುತ ವರ್ಷದಲ್ಲಿ ರಾಜ್ಯದಾದ್ಯಂತ ಒಟ್ಟು 12 ಹೊಸ ಪೊಲೀಸ್ ಠಾಣೆಗಳನ್ನು ತೆರೆಯಲಾಗುವುದು ಎಂದು ಗೃಹ ಸಚಿವರು ಮಾಹಿತಿ ನೀಡಿದರು. ಕಲಬುರಗಿ ಜಿಲ್ಲೆಯಲ್ಲೂ ಇಂತಹ ಹೊಸ ಠಾಣೆಗಳ ಸ್ಥಾಪನೆಗೆ ಬೇಡಿಕೆ ಬಂದಿದೆ ಎಂದು ಅವರು ಉಲ್ಲೇಖಿಸಿದರು.
‘ಡಿಜಿಟಲ್ ಅರೆಸ್ಟ್’ ವಂಚನೆಗೆ ಬ್ರೇಕ್; ಸೈಬರ್ ಕ್ರೈಂಗೆ ಪ್ರತ್ಯೇಕ ಎಡಿಜಿಪಿ: ಇತ್ತೀಚೆಗೆ ಸಾರ್ವಜನಿಕರನ್ನು ತೀವ್ರವಾಗಿ ಕಾಡುತ್ತಿರುವ ‘ಡಿಜಿಟಲ್ ಅರೆಸ್ಟ್’ (Digital Arrest) ಹೆಸರಿನ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯು ಗಂಭೀರ ತನಿಖೆ ನಡೆಸುತ್ತಿದೆ.
ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಮತ್ತು ಅದರ ಮೇಲ್ವಿಚಾರಣೆಗಾಗಿಯೇ ಇಲಾಖೆಯಲ್ಲಿ ಪ್ರತ್ಯೇಕವಾಗಿ ಎಡಿಜಿಪಿ (ADGP) ಹುದ್ದೆಯನ್ನು ಸೃಷ್ಟಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸೈಬರ್ ವಂಚನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ದಾಖಲಾಗಿದ್ದ 24 ಸಾವಿರ ಪ್ರಕರಣಗಳ ಪೈಕಿ, ಈಗಾಗಲೇ 10 ಸಾವಿರ ಪ್ರಕರಣಗಳನ್ನು ಭೇದಿಸಿ ಇತ್ಯರ್ಥಪಡಿಸಲಾಗಿದೆ. ಇಂತಹ ತಾಂತ್ರಿಕ ಅಪರಾಧಗಳನ್ನು ಬೇಧಿಸಲು ಪೊಲೀಸ್ ಸಿಬ್ಬಂದಿಗೂ ವಿಶೇಷ ತಾಂತ್ರಿಕ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಡಾ. ಜಿ. ಪರಮೇಶ್ವರ ಅವರು ವಿವರಿಸಿದರು.