ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತದಿಂದ ಕಂಗಾಲಾಗಿ, ಸೂಕ್ತ ಬೆಲೆಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದ ಸೂರ್ಯಕಾಂತಿ (Sunflower MSP) ಬೆಳೆಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ.
ರೈತರ ಹಿತರಕ್ಷಣೆಯ ದೃಷ್ಟಿಯಿಂದ, 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಬೆಂಬಲ ಬೆಲೆ ಯೋಜನೆ (MSP) ಅಡಿಯಲ್ಲಿ ಖರೀದಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಕೃಷಿ ಮಾರುಕಟ್ಟೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ಈ ಆದೇಶವನ್ನು ಹೊರಡಿಸಿದ್ದು, ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ರೂ. 7,721 ನಿಗದಿಪಡಿಸಲಾಗಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ?: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ, ಸೂರ್ಯಕಾಂತಿಯನ್ನು ಅತಿಹೆಚ್ಚು ಬೆಳೆಯುವ ರಾಜ್ಯದ ಪ್ರಮುಖ 11 ಜಿಲ್ಲೆಗಳಲ್ಲಿ ತಕ್ಷಣವೇ ಖರೀದಿ ಕೇಂದ್ರಗಳನ್ನು (Procurement Centers) ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆ ಜಿಲ್ಲೆಗಳೆಂದರೆ:
- ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ.
- ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ.
- ವಿಜಯನಗರ, ರಾಯಚೂರು ಮತ್ತು ಧಾರವಾಡ.
ನೋಂದಣಿ ಮತ್ತು ಖರೀದಿಗೆ ಕಾಲಮಿತಿ :ರೈತರಿಗೆ ಅನುಕೂಲವಾಗುವಂತೆ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಗೆ ನಿರ್ದಿಷ್ಟ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ:
- ನೋಂದಣಿ ಅವಧಿ: 50 ದಿನಗಳು
- ಖರೀದಿ ಅವಧಿ: 60 ದಿನಗಳು ರೈತರ ನೋಂದಣಿ ಪ್ರಕ್ರಿಯೆಯ ಜೊತೆ-ಜೊತೆಗೇ ಖರೀದಿ ಕಾರ್ಯವನ್ನೂ ಆರಂಭಿಸುವಂತೆ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಖರೀದಿ ಪ್ರಕ್ರಿಯೆ ಹೇಗೆ ನಡೆಯಲಿದೆ?: ಗ್ರಾಮೀಣ ಭಾಗದ ರೈತರಿಗೆ ತೊಂದರೆಯಾಗದಂತೆ, ವೈಜ್ಞಾನಿಕ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಗೋದಾಮುಗಳ ಮೂಲಕವೇ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ. ಈ ಬಾರಿಯ ಖರೀದಿ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಕೆಲವು ಪ್ರಮುಖ ಸಂಸ್ಥೆಗಳನ್ನು ನಿಯೋಜಿಸಲಾಗಿದೆ:
- ಕೇಂದ್ರ ಸರ್ಕಾರದ ಸಂಸ್ಥೆಗಳು: ನಾಫೆಡ್ (NAFED) ಮತ್ತು ಎನ್ಸಿಸಿಎಫ್ (NCCF).
- ರಾಜ್ಯ ಸರ್ಕಾರದ ಸಂಸ್ಥೆ: ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ.
ಮಧ್ಯವರ್ತಿಗಳಿಗೆ ಕಡಿವಾಣ: ಬೆಂಬಲ ಬೆಲೆ ಯೋಜನೆಯನ್ನು ವರ್ತಕರು ಮತ್ತು ಮಧ್ಯವರ್ತಿಗಳು ರೈತರ ಹೆಸರಿನಲ್ಲಿ ದುರ್ಬಳಕೆ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಜೊತೆಗೆ, ಪ್ರತಿದಿನದ ಖರೀದಿ ಪ್ರಗತಿಯ ವರದಿಯನ್ನು ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಕಡ್ಡಾಯವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ರೈತರ ಹೋರಾಟಕ್ಕೆ ಸಂದ ಜಯ: ಕೆಲವು ದಿನಗಳ ಹಿಂದೆ ಸೂರ್ಯಕಾಂತಿಗೆ ಉತ್ತಮ ಬೆಲೆ (ರೂ. 7,000 ದಿಂದ 7,500) ಇತ್ತು. ಇದರಿಂದಾಗಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯನ್ನು ಮಾರುಕಟ್ಟೆಗೆ ತಂದಿದ್ದರು. ಆವಕ ಹೆಚ್ಚಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತ ಉಂಟಾಗಿತ್ತು.
ಇದರಿಂದ ರೊಚ್ಚಿಗೆದ್ದ ಗದಗ ಸೇರಿದಂತೆ ಹಲವು ಭಾಗದ ರೈತರು ಬೀದಿಗಿಳಿದು, ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಹೋರಾಟ ನಡೆಸಿದ್ದರು. ರೈತರ ಈ ಹೋರಾಟಕ್ಕೆ ಇದೀಗ ಫಲ ಸಿಕ್ಕಂತಾಗಿದೆ.